← ಶ್ರೀಕೃಷ್ಣ

ಆರು ಹಿತವರು ಎಂದು ನಂಬಬೇಡ 

📂 ಶ್ರೀಕೃಷ್ಣ
✍️ ಕನಕದಾಸ
🏷️ ಕೀರ್ತನೆಗಳು
🎵 ರಾಗ: ಕಾಂಬೋಧಿ
🥁 ತಾಳ: ಝಂಪೆತಾಳ
ಆರು ಹಿತವರು ಎಂದು ನಂಬಬೇಡ
ಆರಿಗಾರಿಲ್ಲ ಆಪತ್ತು ಬಂದೊದಗಿದಡೆ

ಜನಕ ಹಿತದವನೆಂದು ನಂಬಬಹುದೇ ಹಿಂದೆ
ತನಯ ಪ್ರಹ್ಲಾದನಿಗೆ ಪಿತ ಮುನಿದನು
ಜನನಿ ರಕ್ಷಿಪಳೆಂಬೆನೇ ತಿಳಿತಿಳಿದು ಕುಂತಿ
ತನಯ ರಾಧೇಯನಿಗೆ ಎರಡೆಣಿಸಿದ ಮೇಲೆ ||1||

ಮಗನು ತೆತ್ತಿಗನೆನಲೆ ಕಂಸ ತನ್ನಯ ಪಿತನ
ನಿಗಳ ಬಂಧನದಿಂದ ಬಂಧಿಸಿದನು
ಜಗವರಿಯೆ ಸೋದರನು ಮಮತೆಯುಳ್ಳವನೆನಲೆ
ಹಗೆವೆರಸಿ ವಾಲಿಯನು ಅನುಜ ಕೊಲಿಸಿದ ಮೇಲೆ ||2||

ತನಗೆ ದೇಹಾನುಬಂಧಿಗಳೆ ಬಂಧುಗಳೆಂದು
ಮನದಿ ನಿಚ್ಚಳವಾಗಿ ನಂಬಬೇಡ
ಘನ ಕೃಪಾನಿಧಿ ಕಾಗಿನೆಲೆಯಾದಿಕೇಶವನ
ಅನುದಿನದಿ ನಂಬಿದವಗಿಹಪರದಿ ಸುಖವು || 3||
← ಶ್ರೀಕೃಷ್ಣ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.