← ಶ್ರೀಕೃಷ್ಣ

ಎಲ್ಲಿರುವನೋ ರಂಗ ಎಂಬ ಸಂಶಯ ಬೇಡ

📂 ಶ್ರೀಕೃಷ್ಣ
✍️ ಕನಕದಾಸ
🏷️ ಕೀರ್ತನೆಗಳು
🎵 ರಾಗ: ಮುಖಾರಿ
🥁 ತಾಳ: ಝಂಪೆತಾಳ
ಎಲ್ಲಿರುವನೋ ರಂಗ ಎಂಬ ಸಂಶಯ ಬೇಡ ||ಪ||
ಎಲ್ಲಿ ಭಕ್ತರು ಕರೆಯೆ ಅಲ್ಲಿ ಬಂದೊದಗುವನು ||ಅ||

ತರಳ ಪ್ರಹ್ಲಾದ ಹರಿ ವಿಶ್ವಮಯನೆಂದು
ಬರೆದೋದಲವನ ಪಿತ ಕೋಪದಿಂದ
ಸ್ಥಿರವಾದಡೀ ಕಂಬದಲಿ ತೋರು ತೋರೆನಲು
ಭರದಿಂದ ಬರಲದಕೆ ವೈಕುಂಠ ನೆರೆಮನೆಯೆ ||1||

ಪಾಪ ಕರ್ಮವ ಮಾಡಿದಜಮಿಳನ ಯಮಭಟರು
ಕೋಪದಿಂದೆಳೆಯುತಿರೆ ಭೀತಿಯಿಂದ
ತಾ ಪುತ್ರನನು ಕರೆಯೆ ಕೇಳಿ ರಕ್ಷಿಸೆ ಶ್ವೇತ
ದ್ವೀಪವೀ ಧರೆಗೆ ಸನಿಹದಲ್ಲಿಹುದೆ ||2||

ಕರಿರಾಜನನು ನೆಗಳು ನುಂಗುತಿರೆ ಭಯದಿಂದ
ಮೊರೆಯಿಡಲು ಕೇಳಿ ತ್ವರಿತದಲಿ ಬಂದು
ಕರುಣದಲಿ ಬಂಧನವ ಪರಿಹರಿಸೆ ಗಜರಾಜ
ನಿರುವ ಸರಸಿಯು ಅನಂತಾಸನಕೆ ಮುಮ್ಮನೆಯೆ ||3||

ಕುರುಪತಿಯು ದ್ರೌಪದಿಯ ಸೀರೆಯನು ಸೆಳೆಯುತಿರೆ
ತರುಣಿ ಹಾ ಕೃಷ್ಣ ಎಂದೊದರೆ ಕೇಳ್ದು
ಭರದಿಂದ ಅಕ್ಷಯಾಂಬರವೀಯೆ ಹಸ್ತಿನಾ
ಪುರಿಗೆ ದ್ವಾರಾವತಿಯು ಕೂಗಳತೆಯೆ ||4||

ಅಣು ಮಹತ್ತಿನೊಳೆಲ್ಲ ಪರಿಪೂರ್ಣ ವಿಶ್ವಮಯ
ಗಣನೆಯಿಲ್ಲದ ಮಹಾಮಹಿಮನೆನಿಪ
ಘನ ಕೃಪಾನಿಧಿ ಕಾಗಿನೆಲೆಯಾದಿಕೇಶವನು
ನೆನೆದವರ ಮನದೊಳಿಹನೆಂಬ ಬಿರುದುಂಟಾಗಿ ||5||
← ಶ್ರೀಕೃಷ್ಣ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.