← ಶ್ರೀಕೃಷ್ಣ

ಯಾಕೆ ನೀನಿಲ್ಲಿ ಪವಡಿಸಿದೆ ಹರಿಯೆ

📂 ಶ್ರೀಕೃಷ್ಣ
✍️ ಕನಕದಾಸ
🏷️ ಕೀರ್ತನೆಗಳು
🎵 ರಾಗ: ಭೂಪಾಲೀ
🥁 ತಾಳ: ಝಂಪೆತಾಳ
ಯಾಕೆ ನೀನಿಲ್ಲಿ ಪವಡಿಸಿದೆ ಹರಿಯೆ- ಜಗ ||ಪ||
ದೇಕ ವಿಖ್ಯಾತ ಪಶ್ಚಿಮ ರಂಗಧಾಮ ||ಅ||

ತಮನೊಡನೆ ಹೋರಿ ಬೆಟ್ಟವನು ಬೆನ್ನಲಿ ಪೊತ್ತು
ರಮಣಿ ಭೂಮಿಯನು ತಂದಾಯಾಸವೂ
ಅಮರವೈರಿಯ ಕರುಳ ಕಿತ್ತ ಕಡು ಧಾವತಿಯೊ
ಕ್ಷಮೆಯನಳೆದೀ ಪಾದಕಮಲ ನೊಂದವೊ ||1||

ಪೊಡವಿಪಾಲಕರ ವಂಶವನು ವಪನ ಮಾಡಿ
ಕೊಡಲಿಯನು ಬಿಸುಟು ಮಲಗಿದ ಭಾವವೊ
ಮಡದಿಯನು ಕದ್ದೊಯ್ದವನ ಶಿರವನೆ ತರಿದು
ಒಡಲಿನಾಯಾಸದಲಿ ಪವಡಿಸಿದ ಪರಿಯೋ ||2||

ಖೂಳ ಶಿಶುಪಾಲಾದಿ ಎದುರಾಂತ ವೀರರ ಕೊಂದು
ಕಾಳಿಂಗದ ಹೆಡೆಯ ತುಳಿತುಳಿದು ಮೈಯಲಸಿತೊ
ಲೀಲೆಗೋಸುಗ ಬಂದು ನಿರ್ವಾಣದಲಿ ನಿಂದು
ಆ ಲಜ್ಜೆಗಾಗಿ ತಲೆ ಬಾಗಿ ಮಲಗಿದೆಯೊ ||3||

ನಾಲ್ಕು ಯುಗದಾಧಾರಿ ಕಡೆಗೆ ತುರಗವನೇರಿ
ಸಾಕಾಗಿ ದಣಿದು ನೀನಿಲ್ಲಿ ಮಲಗಿದೆಯೊ
ಸಾಕಾರಿಯಾಗಿ ಗೌತಮ ಮುನೀಶ್ವರನಿಗೆ
ಬೇಕೆಂದು ನೀ ಕೊಟ್ಟ ವರಕೆ ಮಲಗಿದೆಯೊ ||4||

ಇನ್ನೆಷ್ಟು ಕಾಲ ನೀನಿಲ್ಲಿ ಮಲಗಿದ್ದರೂ
ನಿನ್ನನೆಬ್ಬಿಸುವವರನೊಬ್ಬರನು ಕಾಣೆ
ಉನ್ನಂತ ಕಾಗಿನೆಲೆಯಾದಿಕೇಶವರಾಯ
ಚೆನ್ನ ಶ್ರೀರಂಗಪಟ್ಟಣದ ರಂಗಧಾಮ ||5||
← ಶ್ರೀಕೃಷ್ಣ ಕನಕದಾಸ ಕೃತಿಗಳು →

✍️ ಪ್ರತಿಕ್ರಿಯೆ ಬರೆಯಿರಿ

ಗರಿಷ್ಠ 1000 ಅಕ್ಷರಗಳು

ಪ್ರತಿಕ್ರಿಯೆಗಳು ಅನುಮೋದನೆಯ ನಂತರ ಪ್ರಕಟವಾಗುತ್ತವೆ.